Monday, 25 December 2023

M Y MEDICAL KIT...

 A.
Emergency medicines...

*Tofisopam( toficalm)-50 mg.
30. (Relaxation+ anxiety free)

*Pantodac DSR 1-0-0 ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ.(Acute Acidity...)

*Cough syrup -Ascoril SF .
( Allergy cough)

*Ketorol- DT- 10 mg (toothache.)

B.
Regular prescription medicines

*1) Glycomet SR - 500 mg.- 60.
SUGAR PILLS.

2) Mixtard 30- penfills-INSULIN
A box - set of Five.

3) Telma AM - 40/5.( B.P. tablets)

4) Rozavel- 10 mg.( Blood thinner).

6) Mouth wash-Dentin 91.
7) METROHEX- Gum- gel...
8) Stolin- (Astringent...Gum Lotion)

9) Thyronorm-75 mg.( Thyroid).

10) Neurobion Forte.( General
Prescription for Nerves.).

11) sterile Lancets.

12) Blood testing strips.

13) ಹೊಟ್ಟೆಯುಬ್ಬರ- ಗ್ಯಾಸ್...

Tab. Sompraz 40 mg 1-0-1 (empty stomach)

Cap. Ganaton 50 mg 1-1-1 (before food)

Syp. Mucaine Gel 10 ml thrice a day before food 

All for 3 days

14 - 
COld-- cough- Allergies... ( Raju)

Tab. Abiways/ Pulmoclear N 1-0-1
Syp. Brozodex S/F 5ml thrice a day after food 

Tab. Allegra M 0-0-1

All after food 
For 5 Days

For leg pain..
Tolfen P    one strip 10 tablets

Thursday, 2 March 2023

ಮನದಾಳದ ಮಾತುಗಳು...
      ‌‌‌‌‌" ನಿಮ್ಮ ಪಲ್ಲಣ್ಣನ ಬಗ್ಗೆ ಒಂದು ಪುಸ್ತಕವನ್ನು ಮೊದಲು ಬರೆ. ಅವರ ಸಾಧನೆಗಳ ದಾಖಲೆಯಾಗಲೇಬೇಕು. ಅವು ಅನೇಕರಿಗೆ ಮುಂದೆ ದಾರಿದೀಪ ಗಳಾಗಬಹುದು, ಬದುಕಿನಲ್ಲಿ ಸ್ಫೂರ್ತಿ ಯಾಗಬಹುದು.ಛಲವೊಂದಿದ್ದರೆ ಮನುಷ್ಯ ಏನು ಬೇಕಾದರೂ ಸಾಧಿಸಬಹುದು-ಎಂಬುದಕ್ಕೆ ಉತ್ತಮ ಉದಾಹರಣೆಯಾಗಬಹುದು- "ಎಂಬುದು ನಮ್ಮ ಪರಿಚಯದ ಹಲವಾರು ಜನರು, ಹಲವಾರು ಬಾರಿ ನನಗೆ ಹೇಳಿದ/ ಹೇಳುತ್ತಲೇ ಇದ್ದ ಮಾತು.
              ನಾನು ಹಾಗೆ ಮಾಡಲು ಹಿಂಜರಿದದ್ದಕ್ಕೆ ಹಲವಾರು  ಕಾರಣಗಳಿವೆ. ಮೊದಲನೇಯದಾಗಿ
ಸ್ವತಃ ಅವನಿಗೇ ಅದರ ಬಗ್ಗೆ ಆಸಕ್ತಿ ಯಿಲ್ಲ.ಏನೋ ಮುಜುಗರ.ಸಂಕೋಚ. ಅವನ ಮಟ್ಟಿಗೆ ತಾನು ಮಾಡಿದ್ದು ತನ್ನ  
ಮನಸ್ಸಿನ ಒತ್ತಾಸೆಗೊಂದು ಪ್ರಾಮಾಣಿಕ  ಪ್ರಯತ್ನ...ಎಂದೋ ಕಂಡ ಒಂದು ಕನಸಿನ ಸಾಕ್ಷಾತ್ಕಾರಕ್ಕೆ
ನಿಷ್ಠೆಯಿಂದ ದುಡಿದ ಫಲ. ಮಾಡಿದ್ದೇನೋ  ಹೌದು,ಆದರೆ ಮಾಡಬೇಕಾದದ್ದು ಬೆಟ್ಟದಷ್ಟಿದೆ.ಎಂಬ ಭಾವ. 
       ಎರಡನೇ ಕಾರಣವೆಂದರೆ ನಾನು ಅವನ ಬಗ್ಗೆ ಬರೆದರೆ ನಿಜವಾಗಿಯೂ ಅದಕ್ಕೆ ನ್ಯಾಯವನ್ನು ಸಲ್ಲಿಸಬಲ್ಲೆನೇ?
ಎಂಬುದು.ನನಗೂ / ಅವನಿಗೂ ಕೇವಲ ನಾಲ್ಕು ವರ್ಷಗಳ ಅಂತರ, ಇನ್ನೂ ನಾಲ್ಕು ತಿಂಗಳು ಕಡಿಮೆಯೇ...
ಏಳನೇ ಇಯತ್ತೆ ಮುಗಿಸಿ ಮುಂದಿನ ಓದಿಗೆ ರಾಣೆಬೆನ್ನೂರಿಗೆ ಅವನು ಹೋದಾಗ ನನಗಾಗಷ್ಟೇ ಎಂಟು ವರ್ಷಗಳಾಗಿರಬಹುದು. ಆಗಾಗ ಅವನು ಊರಿಗೆ ಬರುತ್ತಿದ್ದರೂ ನಮಗೆಂದು ಅವನು ದಕ್ಕಿದ್ದು ಅವನಿಗೆ
ನೌಕರಿ ಸಿಕ್ಕು ಧಾರವಾಡದಲ್ಲಿ ಮನೆ ಮಾಡಿದ ಮೇಲೆಯೇ...ಆಗಲೂ ತಂದೆಯ ಜವಾಬ್ದಾರಿಯನ್ನು ತನ್ನದೇ ಹೆಗಲಿಗೇರಿಸಿಕೊಂಡು ಸದಾ ಬದುಕಿನ ಹೋರಾಟ ನಡೆಸಿದ್ದ ಅವನ ಬಗ್ಗೆ
ಭಯ,ಗೌರವ ಸಾಕಷ್ಟು ಇದ್ದುದು ನಿಜವಾಗಿದ್ದರೂ ಮನಸ್ಸನ್ನು ಬಿಚ್ಚಿಟ್ಟು
ಹರಟಿ ನಿರಾಳವಾಗುವುದಕ್ಕೆ ವೇಳೆ/ ಆ
ರೀತಿಯ ಮನೆಯ ವಾತಾವರಣ ಎರಡೂ ಆ ಕಾಲದಲ್ಲಿ ಇರಲಿಲ್ಲ. ಅಂಥದರಲ್ಲಿ ಒಬ್ಬರ ಬಗ್ಗೆ ಏನನ್ನಾದರೂ ಬರೆಯುವಷ್ಟನ್ನು ನಾನು ಖಚಿತವಾಗಿ ತಿಳಿದುಕೊಂಡಿದ್ದೇನೆ ಎಂಬುದೇ ಉದ್ಧಟತನದ ಮಾತಾಗುವ
ಸಾಧ್ಯತೆಯೇ ಹೆಚ್ಚು.
     ‌    ‌‌   ಮೂರನೆಯದಾಗಿ ಪಲ್ಲಣ್ಣ ವಿಜ್ಞಾನದ ವಿದ್ಯಾರ್ಥಿಯಾಗಿದ್ದರೂ ಅವನ ಸಾಹಿತ್ಯಾಸಕ್ತಿ ತೀವ್ರ.ಅವನ ಮಾತಿನ‌ ಆಳ/ ಅರ್ಥ/ ಗಳಿಗೆಗೊಮ್ಮೆ
ಉದಹರಿಸುವ ದೃಷ್ಟಾಂತಗಳು/ ಮಾತು ಮಾತಿಗೆ ಮಂಕು 
 ಕಗ್ಗಗಳು/ ಸಂಸ್ಕೃತ ಶ್ಲೋಕಗಳು/
ಓದಿದ- ಅನುಭವಿಸಿದ ಘಟನೆಗಳ 
ನೆನಪುಗಳು ,ಇವುಗಳನ್ನು ನೆನೆದರೆ
ಅವನೆದುರು ಬಾಯಿ ತೆರೆಯಲೂ ಆಗದೇ ಕೇವಲ‌ ಕೇಳುತ್ತಿರಬೇಕು ಎನಿಸಿದ್ದೇ ಹೆಚ್ಚು. ಹೀಗಾಗಿ 'ಅವನ‌ ಬಗ್ಗೆ ಬರೆಯಬಾರದೇಕೆ? ಎಂದು ಹಲವು ಬಾರಿ ಅನಿಸಿದರೂ  ಅದು ಸುಲಭವಾಗಿ ಕಾರ್ಯರೂಪಕ್ಕೆ ಬರಲೇಯಿಲ್ಲ.
               ನಾನು ನೌಕರಿಯಿಂದ‌ ನಿವೃತ್ತಳಾಗುವ ಹೊತ್ತಿಗೆ ಅವನ ಕನಸಿನ ಸಾಮ್ರಾಜ್ಯ ರೂಹು ಪಡೆದಾಗಿತ್ತು.ನಿವೃತ್ತಿಯ ನಂತರ ಧಾರವಾಡಕ್ಕೆ ಬಂದ ತಮ್ಮ ಸುಧೀಂದ್ರ ನ ನಿರಂತರ ಬೆಂಬಲ- ಸಹಕಾರದಿಂದ,
ತನ್ನ Software ನೌಕರಿ ಬಿಟ್ಟು ಹಂಚಿನಮನಿ ಕಾಲೇಜಿನ ಉಸ್ತುವಾರಿ
ಕೆಲಸಕ್ಕೆಂದೇ ಬಂದು ನಿಂತ ಮನೋಜನ ಸಹಾಯದ ಬೆಂಬಲದಿಂದ ಕಾಲೇಜು ತನ್ನ ರೆಕ್ಕೆ- ಪುಕ್ಕಗಳನ್ನು ಬಲಿಸಿಕೊಂಡು/ ಬೆಳಸಿಕೊಂಡು ಹೆಚ್ಚಿನ ಹಾರಾಟಕ್ಕೆ 
ಆಕಾಶದತ್ತ  ನೆಗೆಯುವ ಹಂತದಲ್ಲಿದ್ದು
ಹಿಂದಿರುಗಿ ನೋಡುವ ಪ್ರಮೇಯವೇ ಬರಲಿಲ್ಲ.
     ‌        ಆದರೆ ಇಷ್ಟನ್ನು ಸಾಧಿಸಲು
ಅವನು ಪಟ್ಟ ಪಾಡನ್ನೇ ಬರಹ ರೂಪದಲ್ಲಿ ಬರೆಯುವ ವಿಚಾರದ ಒತ್ತಡ ಸುರುವಾದಾಗಲೇ ನಾನು ನನ್ನೆರಡು ಪುಸ್ತಕಗಳನ್ನು ಬರೆದೆ. ಅದರಲ್ಲಿ ಅವನ ಬಗ್ಗೆಯೂ ಒಂದೆರಡು
ಲೇಖನಗಳನ್ನು ಸೇರಿಸಿದೆ, -ನನಗೆ ತಿಳಿದದ್ದು/ ತಿಳಿದಂತೆ. ಆದರೆ ಅದು ಅವನನ್ನು ಕುರಿತು ನನ್ನ ಬುದ್ಧಿಯ ಗ್ರಹಿಕೆಯಷ್ಟೇ ಹೊರತು ಅದರ ಹೊರತಾಗಿ ಇದ್ದದ್ದೇ ಹೆಚ್ಚು...ನಾವು ಮಹಾಸಾಗರದೆಡೆ ಮುಖ ಮಾಡಿ ನಿಂತರೂ ನಮಗೆ ದಕ್ಕುವದು ನಮ್ಮ ಬೊಗಸೆಯ ಅಳತೆಯಷ್ಟೇ...
            ಕೊನೆಗೆ ಒಂದೇ ಮಾತು... ಹೂವಿನ ಪರಿಮಳ/ ಶ್ರೀಗಂಧದ  
ಸುವಾಸನೆಗಳಿಗೆ ಯಾವುದೇ/ ಯಾರದೇ ಹಂಗಿಲ್ಲ.ಅವು ತಂತಾನೇ ಹರಡುತ್ತವೆ.ಹಾಗೆಯೇ ಸತ್ಕಾರ್ಯ ಗಳೂ ಸಹ.ನಮ್ಮ ಅಣ್ಣ ಏನೆಂದು
ನಾವು ಹೇಳಬೇಕಾಗಿಲ್ಲ, ಅವನ ಸಾಧನೆಗಳೇ ಆ ಕೆಲಸ ಮಾಡುತ್ತವೆ. ಅವನಿಂದ ಉಪಕೃತರಾದವರ ಸಂಖ್ಯೆ
ದೊಡ್ಡದು.ಅವರೆಲ್ಲರ ಶುದ್ಧ ಮನಗಳ ಹಾರೈಕೆ ಅವನ ಬೆಂಬಲಕ್ಕಿದೆ.ಎಂಬತ್ತರ
ವಯಸ್ಸಿನಲ್ಲೂ/ ತನ್ನದೇ  ಅನಾರೋಗ್ಯದ ಸಮಸ್ಯೆಗಳ ಮಧ್ಯದಲ್ಲಿಯೂ ಎದೆಗುಂದದೇ ಸದಾಕಾಲ ಕಾಲೇಜು/ ಮಕ್ಕಳು ಎಂದೇ
ಜಪಿಸುವ ಶುದ್ಧಾತ್ಮವನ್ನು ಭಗವಂತನೂ ಬೆಂಬಲಿಸುತ್ತಿದ್ದಾನೆ.
ಅವನಿಗೆ ಇನ್ನಿಷ್ಟು/ ಮತ್ತಷ್ಟು/ ಮಗದಷ್ಟು ಸಾಧಿಸಲು ಬೇಕಾದ ಆಯುರಾರೋಗ್ಯ/ ಅಗಾಧ ಶಕ್ತಿಯನ್ನು
ಆ ಸಾತೇನಹಳ್ಳಿಯ  ಶಾಂತೇಶ ಕರುಣಿಸಲೆಂಬುದೇ ನಮ್ಮೆಲ್ಲರ ಮನದ 
ಏಕೈಕ ಹಾರೈಕೆ...     ‌
    
     ‌        
               

     
                 

Wednesday, 22 February 2023

ಹಾಗೇ ಸುಮ್ಮನೇ...

       ೧೯೫೦ ರ ದಶಕ...ಆಗ ನಾನು ಇನ್ನೂ ಐದು  ವರ್ಷಗಳೂ ತುಂಬದ ಹುಡುಗಿ. ಸುತ್ತಮುತ್ತಲೂ ನಡೆಯುವ ದನ್ನು ಕಣ್ಣರಳಿಸಿ ನೋಡುವದು ಬಿಟ್ಟರೆ ಬೇರೇನೂ ಕೆಲಸವಿಲ್ಲದ ದಿನಗಳವು...

        ಆಗಿನ ಕಾಲದಲ್ಲಿ ಹಿತ್ತಾಳೆ, ತಾಮ್ರ, ಅಲ್ಯೂಮಿನಿಯಮ್ ಬಳಕೆ ಮಾತ್ರ ಇದ್ದ ಕಾಲ..ಕೆಲವರುಷ ಬಳಸಿದ ನಂತರ ತೆಳ್ಳಗಾಗಿ ಅಲ್ಲಲ್ಲಿ ತಳದಲ್ಲಿ ತೂತುಗಳು ಬಿದ್ದು ಬಳಕೆಗೆ ಬಾರದ ಅಲ್ಯೂಮಿನಿಯಮ್ ಪಾತ್ರೆಗಳು. ನಮ್ಮಮ್ಮ B.E. degree ಪಡೆಯದ ಇಂಜಿನಿಯರ್. ಅವುಗಳನ್ನು ಬೋರಲು ಹಾಕಿ ಸಾಲುಸಾಲಾಗಿ ಮೊಳೆಯಿಂದ ಅಂಥವೇ ಮತ್ತಷ್ಟು ತೂತು ಹೊಡೆದು ಸೊಪ್ಪು,ಕಾಳು ಬಸಿಯಲು,ತೊಳೆದು,ಹೆಚ್ಚಿದ ಸೊಪ್ಪು ಹಾಕಿ ಬೇಳೆಯ ಕೊಳಗದ ಮೇಲಿಟ್ಟು ಉಗಿಯಮೇಲೆ ಬೇಯಿಸಿ ವೇಳೆ, ಇಂಧನ ಎರಡೂ ಉಳಿಸಲು ಬಳಸುತ್ತಿದ್ದಳು.

          ದೀಪಾವಳಿಯಲ್ಲಿ ನಾವೆಲ್ಲ ಹಾರಿಸಿ ಬೀಸಿ ಒಗೆದ ಚುಚೇಂದ್ರಿಯ ಕಡ್ಡಿಗಳನ್ನಾರಿಸಿ,ಕಲ್ಲಿಗೆ ತಿಕ್ಕಿ, ಮದ್ದು ಉದುರಿಸಿ,ಹೊಳಪು ಬರಿಸಿ,ಸರಿ ಮಧ್ಯಭಾಗದಲ್ಲಿ U ಆಕಾರಕ್ಕೆ ಬಗ್ಗಿಸಿ ತುರುಬಿಗೆ ಅಕ್ಕಡ( ಆಗಿನ hairclip) ವಾಗಿಸುತ್ತಿದ್ದಳು..

               ನಮ್ಮದು ಮಣ್ಣಿನ ಮನೆ.. ಕೂಡಿಸಿಟ್ಟ ಕಾಳುಕಡಿಗೆ ಇಲಿಗಳು ಸಾಮಾನ್ಯ... ಇಲಿಯೇನಾದರೂ ಗೋಡೆಯಲ್ಲಿ ಗುದ್ದು ಮಾಡಿದರೆ ,ಇಟ್ಟಿಗೆ,ಕಲ್ಲುಗಳಿಂದ ಅದನ್ನು ಅರ್ಧ ಮುಚ್ಚಿ,ಇನ್ನರ್ಧಕ್ಕೆ ಒಡ್ಡುಕಟ್ಟಿ ,ಮೂರು ಗುಂಪುಗಳನ್ನಿಟ್ಟು ಒಂದು ಕಬ್ಪಿಣದ ಪಟ್ಟಿ ಹಾಕಿ ಮಣ್ಣಿನ ನೆಲದಲ್ಲೊಂದು ಹಾಲು/ ಚಹ  ಕಾಸಲು ಇದ್ದಲು ಒಲೆ ಸಿದ್ಧಮಾಡುತ್ತಿದ್ದಳು.ಹರಿದ ಸೀರೆಗಳ ನ್ನು  ನೀಟಾಗಿ ಕತ್ತರಿಸಿ ಜೋಡಿಸಿ ಕೈ ಹೊಲಿಗೆ ಹಾಕಿ ಮಕ್ಕಳಿಗೆ ದುಪ್ಪಟಿ ಗಳನ್ನು ಹೊಲಿದು ಮೈ ಮನ ಬೆಚ್ಚಗಾಗಿಸುತ್ತಿದ್ದಳು.

            ಹೇಳ ಹೊರಟರೆ ಒಂದು ಕಾದಂಬರಿಯಾದೀತು. ಈಗ ಅವಳ ಎಲ್ಲ ಮಕ್ಕಳು, ಮೊಮ್ಮಕ್ಕಳು ಬಹು ಮಹಡಿ ಕಟ್ಟಡದಲ್ಲಿದ್ದಾರೆ.ಮನೆಮುಂದೆ ಸಾಲುಸಾಲಾಗಿ ಕಾರುಗಳು ನಿಲ್ಲುತ್ತಿವೆ. ಎತ್ತರೆತ್ತರ ಬೆಳೆದಂತೆ ಬದುಕು ನೆಲದಿಂದ ದೂರವೇತಾನೇ!!!?? ನಾಲ್ಕು ತಲೆಮಾರುಗಳಿಗೆ ಸಾಕ್ಷಿಯಾದ ನಾನು ಮಾತ್ರ ನೆಲದಾಳದಿಂದ ಚಿಗುರೊಡೆದ ಬದುಕು ಬೆಳೆಬೆಳೆದು ಗಗನಚುಂಬಿ ಯಾದ ಪರಿಯನ್ನು ದಂಗಾಗಿ ನೋಡಿ ದ್ದೇನೆ...ಅನುಭವಿಸಿದ್ದೇನೆ...ಅನುಭಾವಿಸಿದ್ದೇನೆ...ಆಗಿನ ಹಿರೇಕೇರೂರು ತಾಲೂಕಿನ ರಟ್ಟೀಹಳ್ಳಿಯ ಮಣ್ಣಿನ ನೆಲದಿಂದೆದ್ದ ಧೂಳು ಧಾರವಾಡ, ಬೆಂಗಳೂರಿನ ಪರಿಸರದಲ್ಲಿ ಹಾದು, ಅಮೆರಿಕಾ/ ಸ್ವಿಜರ್ಲ್ಯಾಂಡ್/ಕೆನಡಾ/ ಆಸ್ಟ್ರೇಲಿಯಾ/  ಜರ್ಮನಿಯಂಥ ಅನೇಕ ವಿದೇಶೀ ನಗರಗಳ ಗಾಳಿಯಲ್ಲಿ ಲೀನವಾಗಿ ಅಲ್ಲಿಯದೇ ಎಂಬಂತೆ ಒಂದಾಗಿ ಹೋದ ಪವಾಡವನ್ನು ನಾನು
ನಿತ್ಯವೂ ಕಾಣುತ್ತಿದ್ದೇನೆ.ಮನೆಯಲ್ಲಿ ನಮ್ಮೆಲ್ಲರ ಒಟ್ಟು ಮೊಮ್ಮಕ್ಕಳ ಸಂಖ್ಯೆ
ಇಪ್ಪತ್ತಾರು - Not out...
                ಒಮ್ಮೊಮ್ಮೆ ಅನಿಸುತ್ತದೆ, ಅವರನ್ನು ಕೂಡಿಸಿಕೊಂಡು ಅಜ್ಜಿ/ ಮುತ್ತಜ್ಜಿಯರ ಕಥೆಗಳನ್ನು ಹೇಳಿದರೆ
ಅವರು ಹೇಗೆ ಪ್ರತಿಕ್ರಯಿಸಿಯಾರು???

Wednesday, 8 February 2023

'ಹಬ್ಬ'ಗಳೇ 'ಹುಟ್ಟಿದ ದಿನ' ಗಳಾಗುತ್ತಿದ್ದ 'ಕಾಲಮಾನ' ನಮ್ಮದು...

          ಒಮ್ಮೆ ಒಬ್ಬ ಹಿರಿಯ ಸಾಧಕರಿಗೆ ನೂರು ತುಂಬಿದ ಸಂದರ್ಭದಲ್ಲಿ , ಅವರ ' ಶತಾಯುಷ್ಯದ' ಗುಟ್ಟೇನು ಎಂದು  ಸಂದರ್ಶಕನೊಬ್ಬ ಪ್ರಶ್ನೆ ಕೇಳಿದ."ಗುಟ್ಟೂ ಇಲ್ಲ, ಮಣ್ಣೂ ಇಲ್ಲ, ನನ್ನ  ಶತಾಯುಷ್ಯದ ಗುಟ್ಟೆಂದರೆ ನೂರು ವರ್ಷಗಳ ಹಿಂದೆ ನಮ್ಮವ್ವ ನನ್ನನ್ನು ಹಡೆದದ್ದು" ಎಂದಿದ್ದರಂತೆ.

" ಒಂದು ವರ್ಷ ನಮ್ಮ  ಆಯುಷ್ಯದಲ್ಲಿ ಹೆಚ್ಚಾಗುವದೆಂದರೆ, ನಮ್ಮ ಸಾವಿಗೆ  ಒಂದು ವರ್ಷ ನಾವು ಹತ್ತಿರವಾದಂತೆ. ಆಗ ಸಂಭ್ರಮಿಸುವದುವಿಚಿತ್ರವಲ್ಲವೇ? _ಹೀಗೆಂದು ಒಮ್ಮೆ ನಮ್ಮ ಗುರುಗಳನ್ನು ಕೇಳಿದ್ದೆ.
       ‌‌‌‌‌‌   " ಎಷ್ಟೋ ಮಕ್ಕಳು ಹುಟ್ಟುತ್ತವೆ, ಬೆಳಕು ಕಾಣುವ ಮೊದಲೇ ಕಣ್ಣು ಮುಚ್ಚುತ್ತವೆ.ಅನೇಕ ಮಕ್ಕಳಿಗೆ ತಾಯಿ ,ತಂದೆಯ ಭಾಗ್ಯವಿರುವದಿಲ್ಲ. ಲಾಲಿಸಿ, ಪಾಲಿಸುವವರಿರುವದಿಲ್ಲ.ಅನೇಕ ಮಕ್ಕಳು ಹುಟ್ಟುವಾಗಲೋ,ನಂತರ ವೋ  ಅಂಗವಿಕಲರಾಗಿರುತ್ತಾರೆ. ಅನೇಕರಿಗೆ ಬದುಕು ದಿನನಿತ್ಯದ ಹೋರಾಟವಾಗಿರುತ್ತದೆ. ಇದಾವುದೂ ಇಲ್ಲದೇ ಅಥವಾ ಇದನ್ನೆಲ್ಲ ಗೆದ್ದು  ದೈವೀ ಕೃಪೆಯಿಂದ ಕೆಲವರ್ಷಗಳನ್ನು ಕಳೆಯುವಂತಾದರೆ ಅದು ಸಂಭ್ರಮ ವಲ್ಲವೇ?"- ಎಂದಿದ್ದರು ಗುರುಗಳು.  ಮರುಮಾತಾಡದೇ ಒಪ್ಪಿಕೊಂಡಿದ್ದೆ.

   ‌‌‌           ‌   ಅಪರೂಪಕ್ಕೆ ಒಂದು ಮಗುವಾದರೆ ನಿತ್ಯ ಸಂಭ್ರಮ. ಹತ್ತು/ಹನ್ನೆರಡು ಮಕ್ಕಳ ಮಧ್ಯೆ ಇನ್ನೊಂದಾ ದರೆ ಅದು ಆಕಸ್ಮಿಕ. ನಮ್ಮ ವೇಳೆಯಲ್ಲಿ ಆಗುತ್ತಿದ್ದುದು ಅದೇ. 'ಬರಗಾಲದಲ್ಲಿ  ಅಧಿಕಮಾಸ' ಅಂದ ಹಾಗೆ, 'ಹತ್ತರ ಕೂಡ ಹನ್ನೊಂದು' ಅಂದ ಹಾಗೆ , ನಮ್ಮನ್ನು ನಮ್ಮ ಪಾಲಕರು ಬಹುಶಃ ಸ್ವೀಕಾರ ಮಾಡಿದ್ದು ಅನಿಸುತ್ತದೆ. ಅಂದಮೇಲೇ 'ಹುಟ್ಟು' 'ಹಬ್ಬ'ವಾಗು ವದು ಕಲ್ಪನಾತೀತ. ಇದು ಆಗಿನ ಕಾಲದ ಬಹುತೇಕ ಮನೆಗಳಲ್ಲೂ ನನಗೆ  ಕಂಡುಬಂದ ಸತ್ಯ.( ಕನಿಷ್ಠ ನನ್ನ ಪಾಲಿಗೆ).

      ‌‌  ನಮ್ಮ ಹೆಸರಲ್ಲೂ ಹುಟ್ಟುಹಬ್ಬ- ಗಳಾಗುತ್ತಿದ್ದವು.ಆದರೆ ಅದಕ್ಕೆ ಸಮೀಪದಲ್ಲಿ ಮುಂಬರುವ 
ಯಾವುದೋ ಒಂದು ಹಬ್ಬಕ್ಕಾಗಿ ನಾವು ಕಾಯಬೇಕಾಗುತ್ತಿತ್ತು. 'ಎರೆದು ಕೊಳ್ಳುವವರ ನಡುವೆ ಡೊಗ್ಗಿದಂತೆ'  ಅಂದೊಂದು ದಿನ ನಮ್ಮನ್ನು ಕೂಡಿಸಿ, ನೆತ್ತಿಗೆ ಎಣ್ಣೆವೊತ್ತಿ,
'ಆಯುಷ್ಯವಂತಳಾಗು.
'ಭಾಗ್ಯವಂತಳಾಗು.
'ಕಲ್ಲು ಖನಿಯಾಗು.
'ಕರಕಿ ಬೇರಾಗು.
-'ಮೂಡಿ'ದ್ದರೆ ಇನ್ನೂ ಇಷ್ಟು 'ಏನೇನೋ ' ಆಶೀರ್ವದಿಸಿ ಸ್ವಲ್ಪ ಹೆಚ್ಚು ನೀರು ಹಾಕಿ  ಎರೆದರೆ ಅದೇ ಹಬ್ಬ.ಅಂದು ಧಾರ್ಮಿಕ ಹಬ್ಬವೂ ಆದದ್ದರಿಂದ  ಸಹಜವಾಗಿಯೇ ಮಾಡುವ ಸಿಹಿ ತಿಂಡಿಯೇ  ನಮ್ಮ' ಹುಟ್ಟು ಹಬ್ಬದ' main ಮೆನ್ಯೂ'.

          ಆಶ್ಚರ್ಯವೆಂದರೆ ಯಾವ ಕಾಲಕ್ಕೂ ನಾವು ಇದಕ್ಕೂ  ಹೆಚ್ಚು ಏನನ್ನೂ  ಬಯಸುತ್ತಲೇ ಇರಲಿಲ್ಲ ಎಂಬುದು. ಒಂದು ರೀತಿಯಲ್ಲಿ ಬದುಕನ್ನೇ  'pre - programming ' ಮಾಡಿಟ್ಟ ಹಾಗೆ. ' ನಿರೀಕ್ಷೆ ಇಲ್ಲದೆಡೆ ನಿರಾಶೆಯೂ' ಇರುವುದಿಲ್ಲ ಎಂದು ಯಾರೂ ನಮಗೆ ಹೇಳಿಕೊಡದಿದ್ದರೂ  ನಾವು ಕಲಿತಿದ್ದು ನಮ್ಮ ಪಾಲಕರನ್ನು ಅವರ ಸಾದಾ ಬದುಕನ್ನು ನೋಡಿಕೊಂಡೇ ...

   ‌‌‌       ಇಂದಿಗೆ ನನಗೆ ಎಪ್ಪತ್ತೇಳು ಮುಗಿದು ಎಪ್ಪತ್ತೆಂಟಕ್ಕೆ ಕಾಲಿಟ್ಟೆ. ಮನುಷ್ಯನ ಸರಾಸರಿ ವಯಸ್ಸಿನ ಮಿತಿಯನ್ನೂ ದಾಟಿದ್ದಾಗಿದೆ.ಹಲವು ಬಗೆಯ ಸುಖ-ದುಃಖ, ಸವ್ಯ-ಅಪಸವ್ಯ, ಪ್ರೀತಿ-ದ್ವೇಷ, ಅನುಭವ - ಅನುಭಾವ ಗಳ ಅಗ್ನಿದಿವ್ಯ ಹಾದು ಬಂದದ್ದಾಗಿದೆ.  ಇದುವರೆಗೆ ಶಾಲೆ- ಕಾಲೇಜುಗಳು ನನಗೆ ಕಲಿಸಿದ್ದಕ್ಕಿಂತ ಬದುಕಿನಿಂದ ನಾನು ನೇರವಾಗಿ ಕಲಿತದ್ದೇ ಹೆಚ್ಚು.

                  ‌‌‌‌‌‌‌   ‌‌ಈಗ ನನಗೆ ಬೇಕಾದಂತೆ ಬದುಕಬಹುದಾದ ಸ್ವಾತಂತ್ರ್ಯ ಸಿಕ್ಕಿದೆ.
ಮೊಮ್ಮಕ್ಕಳೆಲ್ಲ ಹದಿಹರಯ ದಾಟಿ
ಅಪ್ಪ- ಅಮ್ಮಂದಿರ ವೃತ್ತಗಳಿಂದಲೂ ನಿಧಾನವಾಗಿ ಬಹಿರ್ಮುಖವಾಗಿ ಸ್ವಂತ
ವಲಯಗಳ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಎಲ್ಲರಿಗೂ ಈಗ ME TIME
ಹೆಚ್ಚು ದೊರಕುತ್ತಿದೆ. ಪರಿಣಾಮವಾಗಿ
ನಮ್ಮದೆಂದೇ ಒಂದು Work strategy
ಕಂಡುಕೊಳ್ಳುವದು ಸುಲಭವಾಗಿದೆ.

                  ನನ್ನದ್ಯಾವಾಗಲೂ ಒಂದು
Frame Work ನಲ್ಲೇ ಕೆಲಸ.ಬೆಳಗಿನ
ದಿನಚರಿ/ ಸ್ನಾನ/ break fast/ ಅರ್ಧ ಗಂಟೆ ಬಿಸಿಲು- ಸ್ನಾನ/ ಒಂದು ಗಂಟೆ face- book ಓದು- ಬರಹ/ ನಂತರ ಒಂದು ಗಂಟೆ ಅಡುಗೆ ಮನೆಯಲ್ಲಿ/ ಊಟದ ನಂತರ ವಿಶ್ರಾಂತಿ/ಒಂದೆರೆಡು
ಸೀರಿಯಲ್- U Tube ಆಯ್ದ ಕಾರ್ಯ
ಕ್ರಮಗಳು/ ಚಹ- ಒಂದೆರಡು ಫೋನುಗಳು ಹೀಗೆ...ಯಥಾಪ್ರಕಾರ
ಸಂಜೆ- ರಾತ್ರಿ...ಒಮ್ಮೊಮ್ಮೆ ಆಚೀಚೆ ಯಾಗುವದುಂಟು, ಆದರೂ ತುಂಬಾ ಕಡಿಮೆ...

            ‌   ಬದುಕು‌ ಏನೇ ಪರೀಕ್ಷೆ ಒಡ್ಡಲಿ, ತಕರಾರು ಮಾಡುವ ಹಂತ ಮೀರಿದ್ದೇನೆ.ಇಷ್ಟೂ ಸಿಗದ ಅನೇಕ ಹತಭಾಗ್ಯರನ್ನು ಕಂಡಿದ್ದೇನೆ/ ಓದಿದ್ದೇನೆ/ ಕೇಳಿದ್ದೇನೆ/ನನಗೆ ಬದುಕಿನ ಬಗ್ಗೆ ತಕರಾರಿಲ್ಲ. ಒಂದೊಮ್ಮೆ ಮುಖ್ಯ 'ಬಾಗಿಲನ್ನೇ'- ಮುಚ್ಚಿ ಹೆದರಿಸಿದ್ದರೂ ನಂತರದಲ್ಲಿ ನೂರು 'ಕಿಟಕಿ'ಗಳನ್ನು ನನಗಾಗಿ ತೆರೆದು, ಬದುಕು ನನ್ನ ದಾರಿ ಸುಗಮಗೊಳಿಸಿದೆ. ಅದಕ್ಕಾಗಿ‌ ನಾನದಕ್ಕೆ ಚಿರ ಋಣಿ... ಅದು ಕೊಟ್ಟದ್ದನ್ನು ಸಮರ್ಥವಾಗಿ ಬಳಸಿಕೊಂಡ ಬಗ್ಗೆ ನನಗೆ ತೃಪ್ತಿ/ ಹೆಮ್ಮೆ ಎರಡೂ ಇದೆ.  ಹೀಗೆಯೇ ಮುಂದೆಯೂ ನಡೆಯಬಹುದೆಂಬ ಕನಿಷ್ಟ ಆಸೆ- ಭರವಸೆ- ನಿರೀಕ್ಷೆ ಎಲ್ಲವುಗಳೊಂದಿಗೆ ಬದುಕಿನ ಶೇಷಭಾಗ ಕಳೆಯುವದೀಗ ನನ್ನ ಆದ್ಯತೆ...
    
     ‌   ‌‌‌‌  ಒಟ್ಟಿನಲ್ಲಿ, ಹುಟ್ಟುಹಬ್ಬವೆಂದರೆ,
10 % Functions.90% Emotions. ಇದು ನನ್ನ ಭಾವನೆ.

ಒಂದು ಹೊಸ ಉಡುಪು,
ಎರಡು ಮನ್ ಪಸಂದ್ ಖಾದ್ಯಗಳು...
ಮೂರು/ನಾಲ್ಕು  ಆತ್ಮೀಯ ಕರೆಗಳು...
ಮನೆ ಜನರೊಡನೆ ಒಂದಿಷ್ಟು  ರಸಗಳಿಗೆಗಳು...
THAT'S  IT...

Wednesday, 25 January 2023

" ತತ್ವ ಸಿಲುಕದೆಮ್ಮಯ ತರ್ಕಶಾಂಕುಶಕೆ"

        ೧೯೭೨ ರ ಅಕ್ಟೋಬರ್ ತಿಂಗಳು. ನಮ್ಮ ಮದುವೆಯಾಗಿ ಕೇವಲ ಎರಡೇ ವರ್ಷ. ನನ್ನವರಿಗೆ ಮೊದಲ ಬಾರಿ ಲಘು ಹೃದಯಾಘಾತ ವಾಗಿತ್ತು.ನಾನು ಆ ಶಬ್ದವನ್ನೇ ಅದುವರೆಗೂ ಕೇಳಿರಲಿಲ್ಲ. ನಮ್ಮದೊಂದು ಪುಟ್ಟ 
ಹಳ್ಳಿ. ಕೆಳ ಮಧ್ಯಮ ವರ್ಗದ ಕುಟುಂಬ.ದುಡಿತ ಅನಿವಾರ್ಯ. ಹೆಚ್ಚು ಕಡಿಮೆ ಎಲ್ಲರದೂ ಅದೇ ಬದುಕು. ಹೀಗಾಗಿ ಗಟ್ಟಿ ಜೀವಗಳು.ಎಂಬತ್ತು/ ತೊಂಬತ್ತು ಎಂದರೆ ಮಧ್ಯ ವಯಸ್ಸು ಎಂಬಂಥ ಚಟುವಟಿಕೆ. ಯಾರಾದರೂ ಏಕಾಏಕಿ ಹೋದರೆ " ಕಲ್ಲು ಗುಂಡಿನ ಹಾಗಿದ್ದ, ಒಂದು ದಿನ ಛಟ್ ಅಂತ ಸೀತವನಲ್ಲ, ಕೂತು ಕೂತಲ್ಲೇ ಹೋದ ಪುಣ್ಯಾತ್ಮ"- ಎಂಬಂಥ ಮಾಮೂಲು ಶರಾ. ಹೀಗಾಗಿ ನನಗೆ ಆ ಹೆಸರು ಹೆದರಿಸಲೇಯಿಲ್ಲ. ಕ್ರಮೇಣ ಅದರ ಗಂಭೀರತೆಯ ಅರಿವಾದಾಗಲೇ ಅನಾವಶ್ಯಕ ಅಂಜಿಕೆ ಶುರುವಾದದ್ದು. ಅವರು ಮನೆಗೆ ಬರುವದು ತಡವಾದರೆ/ ರವಿವಾರ ಹೆಚ್ಚು ಹೊತ್ತು
ಮಲಗಿದರೆ/ ಹೊರಗಿನಿಂದ ನಾನೇನಾದರೂ ಬಂದಾಗ ಮನೆ ಮುಂದೆ ನಾಲ್ಕು ಜನ ಹೆಚ್ಚು ಕಂಡರೆ
ಎದೆ ಝಲ್ ಎನ್ನಲು ಶುರುವಾದದ್ದು. ಅವರನ್ನು ಕಳೆದುಕೊಂಡದ್ದು ೧೯೮೩ ಅಕ್ಟೋಬರ್...ಸರಿಯಾಗಿ ನಲವತ್ತು ವರ್ಷಗಳ ಹಿಂದೆ.
             
          ಆಮೇಲೆ ಸದಾಕಾಲ ನನಗೆ ಅನಿಸುತ್ತಿದ್ದುದು ಒಂದೇ.ಈಗಿನಂತೆ
ಆಗ ವೈದ್ಯಕೀಯ ಸೌಲಭ್ಯಗಳು ಇದ್ದರೆ!
ನಮ್ಮ ಬಳಿ ಮುಂಬೈ / ಬೆಂಗಳೂರಿಗೆ ಹೋಗಿ ಚಿಕಿತ್ಸೆ ಮಾಡಿಸುವಷ್ಟು ದುಡ್ಡಿದ್ದರೆ ! ಸ್ವಲ್ಪ ಮೊದಲೇ ತಿಳಿದಿದ್ದರೆ. ಹಾಗಾಗಿದ್ದರೆ...ಹೀಗಾಗಿದ್ದರೆ...ಎಂದು. 
          ‌
                ಈಗ ಗೊತ್ತಾಗುತ್ತಿದೆ, ಏನಿದ್ದರೂ ಏನೂ ಆಗುತ್ತಿರಲಿಲ್ಲ, ಆಗುವದೇ ಆಗುತ್ತಿತ್ತು...ಅದೆಲ್ಲ ಕಾಲ ನಿರ್ಣಿತ.ಅದಕ್ಕೆ ಇಂದಿನ ವಿದ್ಯಮಾನ ಗಳೇ ಸಾಕ್ಷಿ...ಎಲ್ಲರಲ್ಲೂ ಸಾಕಷ್ಟು ದುಡ್ಡಿದೆ...ಮನುಷ್ಯನ ಹೃದಯಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ತೆರೆದ ಹೃದಯ ಚಿಕಿತ್ಸೆ  ಮಾಡುವಷ್ಟು ವಿಜ್ಞಾನ ಮುಂದುವರೆದಿದೆ...ಹೆಜ್ಜೆಗೊಂದು multi speciality hospitals ಕಾಣ ಸಿಗುತ್ತವೆ.
             ಆದರೂ ಹುಡುಗರು/ ಮುದುಕರು ಎನ್ನದೇ  ನಿಂತಲ್ಲೇ ಕುಸಿದು ಬೀಳುತ್ತಾರೆ.ಈಗ ಇದ್ದವರು ಕ್ಷಣವೊಂದು ಕಳೆಯುವದರಲ್ಲಿ  ಇಲ್ಲವಾಗುತ್ತಿದ್ದಾರೆ. Golden hour ದಲ್ಲೂ ಉಪಚಾರ ಫಲಪ್ರದವಾಗುತ್ತಿಲ್ಲ
" ಹೃದಯಾಘಾತಗಳನ್ನು ತಡೆಯುವದು ಹೇಗೆ ಎಂಬ ಬಗ್ಗೆ ಅಂತರ್ ರಾಷ್ಟೀಯ ಮಟ್ಟದಲ್ಲಿ ಉಪನ್ಯಾಸ ಕೊಡಬೇಕಾಗಿದ್ದವರು ಭಾಷಣದ ವೇಳೆಯಲ್ಲಿಯೇ/ ವೇದಿಕೆಯ ಮೇಲೆಯೇ ಇಲ್ಲವಾದ ಸುದ್ದಿಗಳನ್ನು ಓದುತ್ತಿದ್ದೇವೆ. ಪತ್ರಿಕೆಗಳಲ್ಲಿ/ ಫೋನುಗಳಲ್ಲಿ/ face book ನಲ್ಲಿ ಇಂಥವೇ ಸುದ್ದಿಗಳ ಸದ್ದು
ಹೆಚ್ಚಾಗುತ್ತಿವೆ.ಬದುಕಿನ ಶೈಲಿ/ ವಿಶ್ರಾಂತಿ ರಹಿತ ಜೀವನ/ ಸುಲಭ ಸಾಧ್ಯವಲ್ಲದ ಕುಟುಂಬದ ಬೆಂಬಲ/ 
ಹೆಚ್ಚುತ್ತಿರುವ ಮಹತ್ವಾಕಾಂಕ್ಷೆ  ಇಂಥ
ಹಲವಾರು ಕಾರಣಗಳೇನೇ ಕೊಡಲು ಇದ್ದರೂ ಅಂತಿಮ ಸತ್ಯ ಒಂದೇ...

" ನಾವು ' ಕೇವಲ‌' ಮನುಷ್ಯರು"-ಬದುಕಿನ ಜಟಕಾ ಬಂಡಿಯ ' ಸಾಹೇಬ ಬೇರೆಯೇ ಇದ್ದಾನೆ".

                
  
 

Wednesday, 18 January 2023

ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ
ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ
ಅಟ್ಟಿ ಹಿಡಿದು ಮುಟ್ಟಿ ತಡೆದು ಗುಟ್ಟು ಸವೆಯಿತ್ತೇ.... ಗೆಳತಿ ||
ಅಪ್ಪನು ಬೆಳೆಸಿದ ಮಲ್ಲಿಗೆ ಚಪ್ಪರ ಹೂವನು ಚೆಲ್ಲಿತ್ತೆ
ಅಮ್ಮನು ಬಡಿಸಿದ ಊಟದ ಸವಿಯು ಘಮ್ಮನೆ ಕಾಡಿತ್ತೆ
ಅಣ್ಣನ ಕೀಟಲೆ ತಮ್ಮನ ಕಾಟಕೆ ಬಣ್ಣದ ಬೆಳಕಿತ್ತೆ || ೧ ||
ನಲ್ಲನ ಕಣ್ಣಿನ ಸನ್ನೆಗೆ ಕವಿತೆಯ ಸುಳ್ಳಿನ ಸೊಬಗಿತ್ತೆ
ಮೆಲ್ಲನೆ ಉಸುರಿದ ಸೊಲ್ಲಿನ ರುಚಿಯು ಬೆಲ್ಲವ ಮೀರಿತ್ತೆ
ಸುಳ್ಳೇ ನೆರಿಗೆಯ ಚಿಮ್ಮುವ ನಡಿಗೆಗೆ ಬಳ್ಳಿಯ ಬೆಡಗಿತ್ತೆ || ೨ ||
ಎಂಥಾ ಹದವಿತ್ತೇ ಹರೆಯಕೆ ಏನು ಮುದವಿತ್ತೇ
ಕಾಣದ ಕೈಯಿ ಎಲ್ಲ ಕದ್ದು ಉಳಿಯಿತು ನೆನಪಷ್ಟೇ ||
- ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ

ಎಲ್ಲಿ ಜಾರಿತೋ ಮನವು...
ಎಲ್ಲಿ ಜಾರಿತೋ ಮನವು ಎಲ್ಲೇ ಮೀರಿತೋ,
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ.
ದೂರದೊಂದು ತೀರದಿಂದ
ತೇಲಿ ಪಾರಿಜಾತ ಗಂಧ
ದಾಟಿ ಬಂದು ಬೇಲಿಸಾಲ
ಪ್ರೀತಿ ಹಳೆಯ ಮಧುರ ನೋವ
ಎಲ್ಲಿ ಜಾರಿತೋ...
ಬಾನಿನಲ್ಲಿ ಒಂಟಿ ತಾರೆ
ಸೋನೆ ಸುರಿವ ಇರುಳ ಮೊರೆ
ಕತ್ತಲಲ್ಲಿ ಕುಳಿತು ಒಳಗೆ
ಬಿಕ್ಕುತಿಹಳು ಯಾರೋ ನೀರೆ
ಎಲ್ಲಿ ಜಾರಿತೋ...
ಹಿಂದೆ ಯಾವ ಜನ್ಮದಲ್ಲೋ
ಮಿಂದ ಪ್ರೇಮ ಜಲದ ಕಂಪು
ಬಂದು ಚೀರುವೆದೆಯ ಭಾವ
ಹೇಳಲಾರೆ ತಾಳಲಾರೆ
ಎಲ್ಲಿ ಜಾರಿತೋ...
ಎಲ್ಲಿ ಜಾರಿತೋ ಮನವು ಎಲ್ಲೇ ಮೀರಿತೋ,
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ.
ಎಲ್ಲಿ ಜಾರಿತೋ, ಎಲ್ಲೇ ಮೀರಿತೋ, ಇಲ್ಲದಾಯಿತೋ...
- ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ

ತೊರೆದು ಹೋಗದಿರೋ ಜೋಗಿ....
ತೊರೆದು ಹೋಗದಿರೋ ಜೋಗಿ.
ಅಡಿಗೆರಗಿದ ಈ ದೀನಳ ಮರೆತು,
ಸಾಗುವೆ ಏಕೆ ವಿರಾಗಿ.
ಪ್ರೇಮ ಹೋಮದ ಪರಿಮಳ ಪಥದಲಿ
ಸಲಿಸು ದೀಕ್ಷೆ ಎನಗೆ.
ನಿನ್ನ ವಿರಹದಲಿ ಉರಿದು ಹೋಗಲು
ಸಿದ್ಧಳಿರುವ ನನಗೆ.
ಹೂಡುವೆ ಗಂಧದ ಚಿತೆಯ
ನಡುವೆ ನಿಲುವೆ ನಾನೇ,
ಉರಿ ಸೋಕಿಸು ಪ್ರಭುವೇ,
ಚಿತೆಗೆ ಪ್ರೀತಿಯಿಂದ ನೀನೇ.
ಉರಿದು ಉಳಿವೆನು ಬೂದಿಯಲಿ
ಲೇಪಿಸಿಕೋ ಅದ ಮೈಗೆ.
ಮೀರಾಪ್ರಭು ಗಿರಿಧರನೇ, ಜ್ಯೋತಿಯು
ಜ್ಯೋತಿಯ ಸೇರಲಿ ಹೀಗೆ.
- ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ

ಬಂದೇ ಬರತಾವ ಕಾಲ...
ಬಂದೇ ಬರತಾವ ಕಾಲ
ಮಂದಾರ ಕನಸನು
ಕಂಡಂಥ ಮನಸನು
ಒಂದು ಮಾಡುವ ಸ್ನೇಹಜಾಲ
- ಬಂದೇ ಬರತಾವ ಕಾಲ
ಮಾಗಿಯ ಎದೆ ತೂರಿ
ಕೂಗಿತೊ ಕೋಗಿಲ,
ರಾಗದ ಚಂದಕೆ
ಬಾಗಿತೊ ಬನವೆಲ್ಲ,
ತೂಗುತ ಬಳ್ಳಿ ಮೈಯನ್ನ
ಸಾಗದು ಬಾಳು ಏಕಾಕಿ ಎನುತಾವ
- ಬಂದೇ ಬರತಾವ ಕಾಲ
ಹುಣ್ಣಿಮೆ ಬಾನಿಂದ
ತಣ್ಣನೆ ಸವಿಹಾಲು
ಚೆಲ್ಲಿದೆ ಮೆಲ್ಲನೆ
ತೊಯಿಸಿದೆ ಬುವಿಯನು
ಮುಸುಕಿದೆ ಮಾಯೆ ಜಗವನು
ಬುವಿ ಬಾನು ಸೇರಿ ಹರಸ್ಯಾವ ಬಾಳನು
- ಬಂದೇ ಬರತಾವ ಕಾಲ
- ಎನ್.ಎಸ್. ಲಕ್ಷ್ಮಿನಾರಾಯಣ ಭಟ್ಟ

ಅಂಥಿಂಥ ಹೆಣ್ಣು ನೀನಲ್ಲ
ನಿನ್ನಂಥ ಹೆಣ್ಣು ಇನ್ನಿಲ್ಲ.
ಹೆಡೆಹೆಡೆಯ ಸಾಲು ತುರುಬೆಲ್ಲ,
ಗುಡಿನಿಂದ ಹೂವು ಮೇಲೆಲ್ಲ,
ತೆರೆತೆರೆಯ ಹೊರಳು ಕುರುಳೆಲ್ಲ,
ಸುಳಿಮಿಂಚು ಕಣ್ಣ ಹೊರಳೆಲ್ಲ!
ಮಣಿಮಲೆ ಕೊರಳ ದನಿಯೆಲ್ಲ,
ಹೊಂಬಾಳೆ ಆಸೆ ಒಳಗೆಲ್ಲ.
ಒತ್ತಾಯವಿಲ್ಲ: ಒಲವೆಲ್ಲ!
ನಿನ್ನಂಥ ಹೆಣ್ಣು ಹಲವಿಲ್ಲ.
ಎದೆಮಟ್ಟ ನಿಂತ ಹೂ ಬಳ್ಳಿ;
ಎಷ್ಟೊಂದು ಹೂವು ಅದರಲ್ಲಿ!
ಉಸಿರುಸಿರು ಮೊಗ್ಗು ಹೂವೆಲ್ಲ;
ನೀ ಬಳ್ಳಿ ಬೆಳಕು ಬದುಕೆಲ್ಲ!
ನಡುಬೆಟ್ಟದಲ್ಲಿ ನಿನ್ನೂರು;
ಅಲ್ಲಿಹವು ನವಿಲು ಮುನ್ನೂರು.
ಮುನ್ನೂರು ನವಿಲು ಬಂದಂತೆ
ನೀ ಬಂದರೆನಗೆ; ಸಿರಿವಂತೆ.
ನಡುದಾರಿಯಲ್ಲಿ ನನ್ನೂರು;
ಕುಡಿಮಿಂಚಿನೂರು ಹೊನ್ನೂರು
ಮುನ್ನೂರು ಮೆಂಚು ಹೊಳೆದಂತೆ
ನೀ ಬಂದರೆನಗೆ, ಸಿರಿವಂತೆ.
ಬಲುದೂರ ದೂರ ನೀನಾಗಿ,
ಹೊಂಗನಸು ನಡುವೆ ದನಿತೂಗಿ,
ಕಾದಿರಲು ನಾನು ನಿನಗಾಗಿ
ನೀ ಬರುವೆ ಚೆಲುವೆ ಹೊಳೆಯಾಗಿ.
ಏನಂಥ ಚೆಲುವೆ ನೀನಲ್ಲ.
ನೀನಲ್ಲ? ಚೆಲುವೆ ಇನ್ನಿಲ್ಲ!
ಹಾಡಲ್ಲ, ನೀನು ಕನಸಲ್ಲ;
ನಿನ್ನಿಂದ ಹಾಡು ಕನಸೆಲ್ಲ.
-- ಕೆ.ಎಸ್.ಎನ್

ಹಕ್ಕಿಯ ಹಾಡಿಗೆ ತಲೆದೂಗುವ ಹೂ ನಾನಾಗುವ ಆಸೆ.
ಹಸುವಿನ ಕೊರಳಿನ ಗೆಜ್ಜೆಯ ದನಿಯು ನಾನಾಗುವ ಆಸೆ.
ಹಬ್ಬಿದ ಕಾಮನ ಬಿಲ್ಲಿನ ಮೇಲಿನ ಮುಗಿಲಾಗುವ ಆಸೆ.
ಚಿನ್ನದ ಬಣ್ಣದ ಜಿಂಕೆಯ ಕಣ್ಣಿನ ಮಿಂಚಾಗುವ ಆಸೆ.
ತೋಟದ ಕಂಪಿನ ಉಸಿರಲಿ ತೇಲುವ ಜೇನಾಗುವ ಆಸೆ.
ಕಡಲಿನ ನೀಲಿಯ ನೀರಲಿ ಬಳುಕುವ ಮೀನಾಗುವ ಆಸೆ.
ಸಿಡಿಲನು ಕಾರುವ ಬಿರುಮಳೆಗಂಜದೆ ಮುನ್ನಡೆಯುವ ಆಸೆ.
ನಾಳೆಯ ಬದುಕಿನ ಇರುಳಿನ ತಿರುವಿಗೆ ದೀಪವನಿಡುವಾಸೆ.
ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸೆ.
ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ.
-- ಕೆ.ಎಸ್.ಎನ್

Chetu' s Khata...

Chetana Koulagi... 40000/-  15-8-26...